Surprise Me!

ಮಾಘ ಹುಣ್ಣಿಮೆ: ಶ್ರೀ ನಂಜುಂಡೇಶ್ವರನ ದರ್ಶನಕ್ಕೆ ಹರಿದುಬಂತು ಭಕ್ತ ಸಾಗರ

2026-02-02 4 Dailymotion

ಮೈಸೂರು: ಮಾಘ ಹುಣ್ಣಿಮೆಗೆ ಇತಿಹಾಸ ಪ್ರಸಿದ್ಧ ದಕ್ಷಿಣದ ಕಾಶಿ ನಂಜನಗೂಡಿನ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಇಂದು ಲಕ್ಷಾಂತರ ಭಕ್ತರು ಆಗಮಿಸಿದ್ದರು.

ಬೆಳಗ್ಗೆ 4 ಗಂಟೆಗೆ ಭಕ್ತರು ಕಪಿಲಾನದಿಯಲ್ಲಿ ತೀರ್ಥ ಸ್ನಾನ ಮಾಡಿ, ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ದೇವಾಲಯದ ಹೊರಭಾಗದಲ್ಲಿ ಧೂಪ, ದೀಪ ಸೇವೆ, ತುಲಾಭಾರ ಹಾಗು ಉರುಳು ಸೇವೆ ಸಲ್ಲಿಸಿ ಹರಕೆ ತೀರಿಸಿದರು.

ನಂಜುಂಡೇಶ್ವರ ಸ್ವಾಮಿಯನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ಪಂಚತೀರ್ಥಗಳ ಅಭಿಷೇಕ, ಬಿಲ್ವಾರ್ಚನೆ, ಪಂಚಾಮೃತ ಅಭಿಷೇಕ, ಕ್ಷೀರಾಭಿಷೇಕ, ಶಾಲ್ಯಾನ್ನ ಅರ್ಪಿಸಲಾಯಿತು. ಮಹಾಮಂಗಳಾರತಿಯ ನಂತರ ಭಕ್ತರಿಗೆ ದರ್ಶನಕ್ಕೆ ಅನುವು ಮಾಡಿಕೊಡಲಾಯಿತು. ದಾಸೋಹ ಭವನದಲ್ಲಿ ವಿಶೇಷ ಸಿಹಿ ಭೋಜನದ ವ್ಯವಸ್ಥೆ ಮಾಡಲಾಗಿತ್ತು. 

ದೇಶ-ವಿದೇಶಗಳಿಂದಲೂ ಭಕ್ತರು ಆಗಮಿಸಿದ್ದರು. ಹೊರರಾಜ್ಯ ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು. 

ಭಕ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ಸಂಚಾರ ದಟ್ಟಣೆಯಲ್ಲಿ ಸಿಲುಕಿ ಭಕ್ತರು ಪರದಾಡಿದರು. ಆಂಬ್ಯುಲೆನ್ಸ್​ಗೂ ಟ್ರಾಫಿಕ್ ಜಾಮ್ ಬಿಸಿ ತಟ್ಟಿತು. 

ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಇತ್ತೀಚೆಗೆ ಹೆಚ್ಚು ಟ್ರಾಫಿಕ್ ಜಾಮ್ ಕಂಡುಬರುತ್ತಿದ್ದು, ಬಸ್ ನಿಲ್ದಾಣ ಇಲ್ಲದಿರುವುದು ಇದಕ್ಕೆ ಕಾರಣವಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲೇ ಬಸ್ ನಿಲುಗಡೆ ಆಗುತ್ತಿರುವುದರಿಂದ ಟ್ರಾಫಿಕ್ ಜಾಮ್ ಆಗುತ್ತಿದೆ ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ. 

ಮಾಘ ಪೂರ್ಣಿಮೆಯ ಹಿನ್ನೆಲೆಯಲ್ಲಿ ನಂಜನಗೂಡು ರೈಲ್ವೆ ನಿಲ್ದಾಣ, ಅಂಬೇಡ್ಕರ್ ಖಾಸಗಿ ಬಸ್ ನಿಲ್ದಾಣ, ಹಳೇ ಮತ್ತು ಹೈಟೆಕ್ ಕೆಎಸ್ಆರ್​ಟಿಸಿ ಬಸ್ ನಿಲ್ದಾಣಗಳಲ್ಲಿ ಹೆಚ್ಚು ಜನಸಂದಣಿ ಇತ್ತು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.

ಇದನ್ನೂ ನೋಡಿ: ಸವದತ್ತಿ ಯಲ್ಲಮ್ಮನಗುಡ್ಡದಲ್ಲಿ ಬನದ ಹುಣ್ಣಿಮೆ ಜಾತ್ರೆ ಸಂಭ್ರಮ: ಲಕ್ಷಾಂತರ ಭಕ್ತರ ಸಮಾಗಮ