ಬಳ್ಳಾರಿ: ಮುಂಗಾರು ಮಳೆ ಕೈಕೊಟ್ಟಿರುವುದು ಹಾಗೂ ತುಂಗಭದ್ರಾ ಜಲಾಶಯದಿಂದ ನೀರು ಹರಿಸದಿರುವ ಹಿನ್ನೆಲೆ ಜಿಲ್ಲೆಯಲ್ಲಿ ಬರದ ವಾತಾವರಣ ನಿರ್ಮಾಣವಾಗಿದೆ. ಪರಿಣಾಮ ಕೃಷಿ ಚಟುವಟಿಕೆಗಳು ಭಾಗಶಃ ಕುಂಠಿತಗೊಂಡಿದ್ದು, ಅನ್ನದಾತರು ಕಣ್ಣೀರು ಹಾಕುವಂತಾಗಿದೆ. ಮಳೆ ನಿರೀಕ್ಷೆಯಲ್ಲೇ ಬಿತ್ತನೆ ನಡೆಸಿದ್ದ ಬೆಳೆಗಳು ನೀರಿನ ಅಭಾವದಿಂದ ಒಣಗುವ ಸ್ಥಿತಿಗೆ ತಲುಪಿವೆ ಎಂದು ಸ್ಥಳೀಯ ರೈತರು ಬೇಸರ ಹೊರಹಾಕುತ್ತಿದ್ದಾರೆ.
ಮುಂಗಾರು ಆರಂಭದಲ್ಲಿ ಒಂದೆರಡು ಬಾರಿ ಉತ್ತಮ ಮಳೆಯಾದ ಕಾರಣ ಮುಂದೆಯೂ ಮಳೆ ಹೀಗೆ ಮುಂದುವರಿಯಬಹುದು ಎಂಬ ನಿರೀಕ್ಷೆಯಲ್ಲಿ ರೈತರು ತೊಗರಿ, ಹತ್ತಿ, ಮೆಣಸಿನಕಾಯಿ, ಮೆಕ್ಕೆಜೋಳ, ಸೂರ್ಯಕಾಂತಿ ಹಾಗೂ ಸಜ್ಜೆ ಸೇರಿದಂತೆ ವಿವಿಧ ಬೆಳೆಗಳನ್ನು ಬಿತ್ತನೆ ಮಾಡಿದ್ದಾರೆ. ಆದರೆ, ಬಳಿಕ ಮಳೆ ಸಂಪೂರ್ಣ ಕೈಕೊಟ್ಟ ಪರಿಣಾಮ ಬೆಳೆಗಳಿಗೆ ಅಗತ್ಯ ತೇವಾಂಶ ದೊರೆಯದೇ ಬೆಳೆಗಳು ಒಣಗುವ ಭೀತಿ ಎದುರಾಗಿದೆ. ಮಳೆ ಕೊರತೆಯಿಂದ ಜಿಲ್ಲೆಯ ಹಲವೆಡೆ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗಿದ್ದು, ಬೆಳೆಗಳ ಬೆಳವಣಿಗೆ ಕುಂಠಿತಗೊಂಡಿದೆ. ಈಗಾಗಲೇ ಬಿತ್ತನೆಯಾಗಿರುವ ಬೆಳೆಗಳು ಸಹ ನೀರಿನ ಅಭಾವದಿಂದ ಒಣಗುತ್ತಿವೆ ಎಂದು ರೈತರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.
ಇನ್ನೊಂದೆಡೆ, ತುಂಗಭದ್ರಾ ನದಿಪಾತ್ರದ ರೈತರು ಭತ್ತದ ಸಸಿ ಮಡಿ ಹಾಕಿ ನಾಟಿಗೆ ಸಿದ್ಧತೆ ಮಾಡಿಕೊಂಡಿದ್ದು, ಇದಕ್ಕಾಗಿ ಲಕ್ಷಾಂತರ ರೂ. ವೆಚ್ಚ ಮಾಡಿದ್ದಾರೆ. ಆದರೆ, ಜಲಾಶಯದಿಂದ ನೀರು ಬಿಡುಗಡೆಯಾಗದ ಕಾರಣ ಸಸಿ ಮಡಿಗಳು ಹಾಗೂ ಈಗಾಗಲೇ ನಾಟಿ ಮಾಡಿದ ಭತ್ತದ ಗದ್ದೆಗಳು ಒಣಗುವ ಸ್ಥಿತಿಗೆ ತಲುಪಿವೆ. ಪರಿಸ್ಥಿತಿಯ ಗಂಭೀರತೆಯನ್ನು ಮನಗಂಡು ತುಂಗಭದ್ರಾ ಜಲಾಶಯದಿಂದ ತಕ್ಷಣ ನೀರು ಬಿಡುಗಡೆ ಮಾಡಬೇಕು. ಜೊತೆಗೆ ಬೆಳೆ ನಷ್ಟದ ಸಮೀಕ್ಷೆ ನಡೆಸಿ ರೈತರಿಗೆ ಸೂಕ್ತ ಪರಿಹಾರ ಹಾಗೂ ಅಗತ್ಯ ನೆರವು ಘೋಷಿಸಬೇಕು ಎಂದು ರೈತರು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಜುಲೈ ಅಂತ್ಯ ಬಂದರೂ ಚುರುಕುಗೊಳ್ಳದ ಮುಂಗಾರು: ಜಲಾಶಯ, ಕೆರೆ - ಕಟ್ಟೆಗಳು ಖಾಲಿ ಖಾಲಿ, ಕೃಷಿ ಚಟುವಟಿಕೆಗಳು ಭಾಗಶಃ ಕುಂಠಿತ